ಸಂಗೀತ, ಗಾಯನದೊಡನೆ ಭಾವಗೀತೆಗಳನ್ನು ಒದಗಿಸುವ ಅನೇಕ ಅಂತರ್ಜಾಲದ ತಾಣಗಳಿದ್ದರೂ ಸಹ ಕೇವಲ ಭಾವಗೀತೆಗಳ ಸಾಹಿತ್ಯಕ್ಕೆ ಮೀಸಲಾದ ತಾಣವಿರುವುದೇ? ತಿಳಿಯದು. ಆದರೆ ಎಷ್ಟೋ ಬಾರಿ ಇಲ್ಲಿ ಅಲೆಯುತ್ತ ಕವಿತೆಗಳ ಸಾಹಿತ್ಯಕ್ಕಾಗಿ ಅರಸಿದಾಗ ತೃಪ್ತಿಯಾಗುವಂತಹ ಫಲಿತಾಂಶ ನನಗಂತೂ ದಕ್ಕಿಲ್ಲ. ಆದ್ದರಿಂದಲೇ ಈ ಪುಟ್ಟ ಪ್ರಯತ್ನ. ಭಾವಗೀತೆಗಳ ಯಾವುದಾದರು ಸಾಲುಗಳು ಇಲ್ಲಿ ತಪ್ಪಾಗಿ ಬರೆಯಲ್ಪಟ್ಟಿದ್ದರೆ ತಿಳಿಸಿ, ಎಷ್ಟೋ ಗೀತೆಗಳು ರಚನಕಾರರ ಹೆಸರಿಲ್ಲದೆ ಹಾಗೆ ಬರೆಯಲ್ಪಟ್ಟಿವೆ, ತಿಳಿದಿದ್ದವರು ಅದನ್ನು ತಿದ್ದಬಹುದು. ಈ ಸಣ್ಣ ಪ್ರಯತ್ನದ ಬಗ್ಗೆ ನಿಮ್ಮ ಒಂದು ಚಿಕ್ಕ ಅಭಿಪ್ರಾಯವನ್ನು ತೇಲಿಬಿಟ್ಟರೆ ಮುದವೆನಿಸುವುದು.




Saturday 24 September 2011

ಬಳೆಗಾರನ ಹಾಡು / Balegaara Channayya bagilige

ಬಳೆಗಾರ ಚೆನ್ನಯ್ಯ ಬಾಗಿಲಿಗೆ ಬಂದಿಹೆನು 
      ಒಳಗೆ ಬರಲಪ್ಪಣೆಯೆ ದೊರೆಯೆ?
ನವಿಲೂರ ಮನೆಯಿಂದ ನುಡಿಯೊಂದ ತಂದಿಹೆನು 
      ಬಳೆಯ ತೊಡಿಸುವುದಿಲ್ಲ ನಿಮಗೆ.
 
ಮುಡಿದ ಮಲ್ಲಿಗೆಯರಳು ಬಾಡಿಲ್ಲ, ರಾಯರೇ,
      ತೌರಿನಲಿ ತಾಯಿ ನಗುತಿಹರು.
ಕುಡಿದ ನೀರಲುಗಿಲ್ಲ, ಕೊರಗದಿರಿ, ರಾಯರೇ,
      ಅಮ್ಮನಿಗೆ ಬಳೆಯ ತೊಡಿಸಿದರು.

ಅಂದು ಮಂಗಳವಾರ ನವಿಲೂರ ಕೇರಿಯಲಿ 
      ಓಲಗದ ಸದ್ದು ತುಂಬಿತ್ತು;
ಬಳೆಯ ತೊಡಿಸಿದರಂದು ಅಮ್ಮನಿಗೆ ತೌರಿನಲಿ 
      ಅಂಗಳದ ತುಂಬಾ ಜನವಿತ್ತು.
.
ಹಬ್ಬದೂಟವನುಂಡು ಹಸೆಗೆ ಬಂದರು ತಾಯಿ,
      ಹೊಳೆದಿತ್ತು ಕೊರಳಿನಲಿ ಪದಕ.
ಒಬ್ಬರೇ ಹಸೆಗೆ ಬಂದರು ತಾಯಿ ಬಿಂಕದಲಿ
      ಕಣ್ತುಂಬ ನೋಡಿದೆನು ಮುದುಕ.

ಸಿರಿಗೌರಿಯಂತೆ ಬಂದರು ತಾಯಿ ಹಸೆಮಣೆಗೆ,
      ಸೆರಗಿನಲಿ ಕಣ್ಣೀರನೊರಸಿ;
ಸುಖದೊಳಗೆ ನಿಮ್ಮ ನೆನೆದರು ತಾಯಿ ಗುಣವಂತೆ, 
      ದೀಪದಲಿ ಬಿಡುಗಣ್ಣ ನಿಲಿಸಿ.

ಬೇಕಾದ ಹಣ್ಣಿಹುದು, ಹೂವಿಹುದು ತೌರಿನಲಿ
      ಹೊಸ ಸೀರೆ ರತ್ನದಾಭರಣ;
ತಾಯಿ ಕೊರಗುವರಲ್ಲಿ ನೀವಿಲ್ಲದೂರಿನಲಿ
      ನಿಮಗಿಲ್ಲ ಒಂದು ಹನಿ ಕರುಣ.

ದಿನವಾದ ಬಸುರಿ ಉಸ್ಸೆಂದು ನಿಟ್ಟುಸಿರೆಳೆದು 
      ಕುದಿಯಬಾರದು ನನ್ನ ದೊರೆಯೆ;
ಹಿಂಡಬಾರದು ದುಂಡುಮಲ್ಲಿಗೆಯ ದಂಡೆಯನು;
      ಒಣಗಬಾರದು ಒಡಲ ಚಿಲುಮೆ.

ಮುನಿಸು ಮಾವನ ಮೇಲೆ; ಮಗಳೇನ ಮಾಡಿದಳು?
      ನಿಮಗೆತಕೀ ಕಲ್ಲು ಮನಸು?
ಹೋಗಿ ಬನ್ನಿರಿ ಒಮ್ಮೆ ಕೈಮುಗಿದು ಬೇಡುವೆನು 
      ಅಮ್ಮನಿಗೆ ನಿಮ್ಮದೇ ಕನಸು.

                                                         - ಕೆ.ಎಸ್. ನರಸಿಂಹ ಸ್ವಾಮಿ 

1 comment: