ಸಂಗೀತ, ಗಾಯನದೊಡನೆ ಭಾವಗೀತೆಗಳನ್ನು ಒದಗಿಸುವ ಅನೇಕ ಅಂತರ್ಜಾಲದ ತಾಣಗಳಿದ್ದರೂ ಸಹ ಕೇವಲ ಭಾವಗೀತೆಗಳ ಸಾಹಿತ್ಯಕ್ಕೆ ಮೀಸಲಾದ ತಾಣವಿರುವುದೇ? ತಿಳಿಯದು. ಆದರೆ ಎಷ್ಟೋ ಬಾರಿ ಇಲ್ಲಿ ಅಲೆಯುತ್ತ ಕವಿತೆಗಳ ಸಾಹಿತ್ಯಕ್ಕಾಗಿ ಅರಸಿದಾಗ ತೃಪ್ತಿಯಾಗುವಂತಹ ಫಲಿತಾಂಶ ನನಗಂತೂ ದಕ್ಕಿಲ್ಲ. ಆದ್ದರಿಂದಲೇ ಈ ಪುಟ್ಟ ಪ್ರಯತ್ನ. ಭಾವಗೀತೆಗಳ ಯಾವುದಾದರು ಸಾಲುಗಳು ಇಲ್ಲಿ ತಪ್ಪಾಗಿ ಬರೆಯಲ್ಪಟ್ಟಿದ್ದರೆ ತಿಳಿಸಿ, ಎಷ್ಟೋ ಗೀತೆಗಳು ರಚನಕಾರರ ಹೆಸರಿಲ್ಲದೆ ಹಾಗೆ ಬರೆಯಲ್ಪಟ್ಟಿವೆ, ತಿಳಿದಿದ್ದವರು ಅದನ್ನು ತಿದ್ದಬಹುದು. ಈ ಸಣ್ಣ ಪ್ರಯತ್ನದ ಬಗ್ಗೆ ನಿಮ್ಮ ಒಂದು ಚಿಕ್ಕ ಅಭಿಪ್ರಾಯವನ್ನು ತೇಲಿಬಿಟ್ಟರೆ ಮುದವೆನಿಸುವುದು.




Saturday 31 December 2011

ಮಾವನ ಮನೆಯಲ್ಲಿ (ರಾಯರು ಬಂದರು ಮಾವನ ಮನೆಗೆ) / Raayaru bandaru maavana manege

ರಾಯರು ಬಂದರು ಮಾವನ ಮನೆಗೆ
     ರಾತ್ರಿಯಾಗಿತ್ತು;
ಹುಣ್ಣಿಮೆ ಹರಸಿದ ಬಾನಿನ ನಡುವೆ
     ಚಂದಿರ ಬಂದಿತ್ತು. - ತುಂಬಿದ
     ಚಂದಿರ ಬಂದಿತ್ತು.

ಮಾವನ ಮನೆಯಲಿ ಮಲ್ಲಿಗೆ ಹೂಗಳ
     ಪರಿಮಳ ತುಂಬಿತ್ತು.
ಬಾಗಿಲ ಬಳಿ ಕಾಲಿಗೆ ಬಿಸಿ ನೀರಿನ
     ತಂಬಿಗೆ ಬಂದಿತ್ತು - ಒಳಗಡೆ
     ದೀಪದ ಬೆಳಕಿತ್ತು.

ಘಮಘಮಿಸುವ ಮೃಷ್ಟಾನ್ನದ ಭೋಜನ
     ರಾಯರ ಕಾದಿತ್ತು.
ಬೆಳ್ಳಿಯ ಬಟ್ಟಲ ಗಸಗಸೆ ಪಾಯಸ
     ರಾಯರ ಕರೆದಿತ್ತು - ಭೂಮಿಗೆ
     ಸ್ವರ್ಗವೆ ಇಳಿದಿತ್ತು.

ಚಪ್ಪರಗಾಲಿನ ಮಂಚದ ಮೇಗಡೆ
     ಮೆತ್ತನೆ ಹಾಸಿತ್ತು.
ಅಪ್ಪಟ ರೆಸಿಮೆ ದಿಂಬಿನ ಅಂಚಿಗೆ
     ಚಿತ್ರದ ಹೂವಿತ್ತು. - ಪದುಮಳು
     ಹಾಕಿದ ಹೂವಿತ್ತು.

ಚಿಗುರೆಲೆ ಬಣ್ಣದ ಅಡಕೆಯ ತಂದಳು
    ನಾದಿನಿ ನಗುನಗುತ;
ಬಿಸಿಬಿಸಿ ಹಾಲಿನ ಬಟ್ಟಲ ತಂದರು
    ಅಕ್ಕರೆಯಲಿ ಮಾವ - ಮಡದಿಯ
    ಸದ್ದೇ ಇರಲಿಲ್ಲ.

ಮಡದಿಯ ತಂಗಿಯ ಕರೆದಿಂತೆಂದರು;
    "ಅಕ್ಕನ ಕರೆಯಮ್ಮ"
ಮೆಲುದನಿಯಲಿ ನಾದಿನಿ ಇಂತೆಂದಳು;
    "ಪದುಮಳು ಒಳಗಿಲ್ಲ" - ನಕ್ಕಳು.
    ರಾಯರು ನಗಲಿಲ್ಲ.

ಏರುತ ಇಳಿಯುತ ಬಂದರು ರಾಯರು
    ದೂರದ ಊರಿಂದ.
ಕಣ್ಣನು ಕಡಿದರು ನಿದ್ದೆಯು ಬಾರದು
    ಪದುಮಳು ಒಳಗಿಲ್ಲ - ಪದುಮಳ
    ಬಳೆಗಳ ದನಿಯಿಲ್ಲ.

ಬೆಳಗಾಯಿತು; "ಸರಿ, ಹೊರಡುವೆ"ನೆಂದರು
    ರಾಯರು ಮುನಿಸಿನಲಿ.
ಒಳಮನೆಯಲಿ "ನೀರಾಯಿತು!" ಎಂದಳು
    ನಾದಿನಿ ರಾಗದಲಿ. "ಯಾರಿಗೆ?"
    ಎನ್ನಲು ಹರುಷದಲಿ.
ಪದುಮಳು ಬಂದಳು ಹೂವನು ಮುಡಿಯುತ
    ರಾಯರ ಕೋಣೆಯಲಿ.

                                                        - ಕೆ. ಎಸ್. ನರಸಿಂಹ ಸ್ವಾಮಿ

No comments:

Post a Comment