ಸಂಗೀತ, ಗಾಯನದೊಡನೆ ಭಾವಗೀತೆಗಳನ್ನು ಒದಗಿಸುವ ಅನೇಕ ಅಂತರ್ಜಾಲದ ತಾಣಗಳಿದ್ದರೂ ಸಹ ಕೇವಲ ಭಾವಗೀತೆಗಳ ಸಾಹಿತ್ಯಕ್ಕೆ ಮೀಸಲಾದ ತಾಣವಿರುವುದೇ? ತಿಳಿಯದು. ಆದರೆ ಎಷ್ಟೋ ಬಾರಿ ಇಲ್ಲಿ ಅಲೆಯುತ್ತ ಕವಿತೆಗಳ ಸಾಹಿತ್ಯಕ್ಕಾಗಿ ಅರಸಿದಾಗ ತೃಪ್ತಿಯಾಗುವಂತಹ ಫಲಿತಾಂಶ ನನಗಂತೂ ದಕ್ಕಿಲ್ಲ. ಆದ್ದರಿಂದಲೇ ಈ ಪುಟ್ಟ ಪ್ರಯತ್ನ. ಭಾವಗೀತೆಗಳ ಯಾವುದಾದರು ಸಾಲುಗಳು ಇಲ್ಲಿ ತಪ್ಪಾಗಿ ಬರೆಯಲ್ಪಟ್ಟಿದ್ದರೆ ತಿಳಿಸಿ, ಎಷ್ಟೋ ಗೀತೆಗಳು ರಚನಕಾರರ ಹೆಸರಿಲ್ಲದೆ ಹಾಗೆ ಬರೆಯಲ್ಪಟ್ಟಿವೆ, ತಿಳಿದಿದ್ದವರು ಅದನ್ನು ತಿದ್ದಬಹುದು. ಈ ಸಣ್ಣ ಪ್ರಯತ್ನದ ಬಗ್ಗೆ ನಿಮ್ಮ ಒಂದು ಚಿಕ್ಕ ಅಭಿಪ್ರಾಯವನ್ನು ತೇಲಿಬಿಟ್ಟರೆ ಮುದವೆನಿಸುವುದು.




Wednesday 18 September 2013

ಭೂಮಿತಾಯಿಯ ಚೊಚ್ಚಿಲ ಮಗ / bhoomitaayiya chocchila maga

ಭೂಮಿತಾಯಿಯಾ
ಚೊಚ್ಚಿಲ ಮಗನನು
ಕಣ್ತೆರೆದೊಮ್ಮೆ
ನೋಡಿಹಿರೇನು?

ಮುಗಿಲೆಂಬುವದು
ಕಿಸಿದಿತು ಹಲ್ಲು!
ಬಂದಾ ಬೆಳೆಯು
ಮಿಡಿಚಿಯ ಮೇವು;
ಬಿತ್ತಿದ್ದಾಯಿತು
ಉತ್ತಿಹ ಮಣ್ಣು!
ದಿನವೂ ಸಂಜೆಗೆ
ಬೆವರಿನ ಜಳಕ,
ಉಸಿರಿನ ಕೂಳಿಗೆ
ಕಂಬನಿ ನೀರು!
ಹೊಟ್ಟೆಯು ಹತ್ತಿತು
ಬೆನ್ನಿನ ಬೆನ್ನು!
ಎದೆಯ ಗೂಡಿನೊಳು
ಚಿಂತೆಯ ಗೂಗಿ!
ಮಿದುಳಿನ ಮೂಲೆಗೆ
ಲೊಟ ಲೊಟ ಹಲ್ಲಿ!
ಮೋರೆಯು ಸಾವನು
ಅಣಕಿಸುತಿಹುದು!
ಕೊರಳಿಗೆ ಹತ್ತಿದೆ
ಸಾಲದ ಶೂಲ!
ಆದರು ಬರದೊ
ಯಮನಿಗೆ ಕರುಣ 
ಉಸಿರಿಗೆ ಒಮ್ಮೆ
ಜನನಾ ಮರಣಾ.

ನರಗಳ ನೂಲಿನ
ಪರೆ ಪರೆ ಚೀಲಾ
ತೆರೆ ತೆರೆಯಾಗಿದೆ
ಜಿರಿಜಿರಿಯಾಗಿದೆ;
ಅದರೊಳಗೊಂದು
ಎಲುಬಿನ ಬಲೆಯು!
ಟುಕು ಟುಕು ಡುಗು ಡುಗು
ಉಲಿಯುವ ನರಳುವ
ಜೀವದ ಜಂತುವು
ಹೊರಳುತ ಉರುಳುತ;
ಜನುಮವೆಂಬುವಾ
ಕತ್ತಲೆಯಲ್ಲಿ
ಬಿದ್ದಿದೆ ಒಳಗೆ
ಹೇಗೋ ಬಂದು!
ಸಾವಿನ ಬೆಳಕದು
ಕಾಣುವದೆಂದು?
ಎಂದೋ ಎಂದು
ಕನವರಿಸುವದು
ತಳಮಳಿಸುವದು!

                                 - ಅಂಬಿಕಾತನಯ ದತ್ತ

*ಬೇಂದ್ರೆಯವರ "ನಾದಲೀಲೆ" ಕವನ ಸಂಕಲನದ ಕವನ. ಕವಿತೆಯದೇ ಹೆಸರಿನಲ್ಲಿ ಮೂಡಿಬಂದ ಚಲನಚಿತ್ರದಲ್ಲಿ ಬಳಕೆಯಾಗಿದೆ.  ಗೀತೆ ನನ್ನ ಬಳಿ ಇಲ್ಲ. ಇದ್ದವರು ಕಳುಹಿಸಿದರೆ ಇಲ್ಲಿ ಜೋಡಿಸುವೆ - ವಸು